ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗ ರಾಜ್ಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಆಟೋಗಳ ಮೇಲಿನ ರಾಜಕೀಯ ಸ್ಟಿಕ್ಕರ್, ಬ್ಯಾನರ್, ಪೋಟೋಗಳನ್ನು ನಿಷೇಧ ಮಾಡಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಹಾಲಸ್ವಾಮಿ ಅವರು, ‘ರಾಜ್ಯದಲ್ಲಿ ಈಗ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಆಟೋಗಳ ಮೇಲೆ ರಾಜಕೀಯ ಪ್ರಚಾರ ಮಾಡಬಾರದು. ಇದುವರೆಗೂ 450 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ದಂಡ ವಸೂಲಿ ಸಹ ಮಾಡಿದ್ದೇವೆ’ ಎಂದು ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಸಾರಿಗೆ ಅಧಿಕಾರಿಗಳು ರಾಜಕೀಯ ನಾಯಕರ ಭಾವಚಿತ್ರ ಹಾಗೂ ಪಕ್ಷಗಳ ಚಿಹ್ನೆ ಹೊಂದಿರುವ ಆಟೋಗಳ ಮೇಲೆ ದಾಳಿ ನಡೆಸಿ ಬ್ಯಾನರ್, ಸ್ಟಿಕ್ಕರ್ಗಳನ್ನು ತೆರವುಗೊಳಿಸಿ ಪ್ರಕರಣ ದಾಖಲಿಸುವ ಕಾರ್ಯಾಚರಣೆ ಮಾಡಿದ್ದಾರೆ. ಈವರೆಗೆ ಬೆಂಗಳೂರು ನಗರದಲ್ಲಿರುವ 11 ಆರ್ ಟಿಒ ವಲಯಗಳಲ್ಲಿ ಬರೊಬ್ಬರಿ 450 ಕ್ಕೂ ಹೆಚ್ಚು ಪ್ರಕರಣಗಳನ್ನು ಸಾರಿಗೆ ಅಧಿಕಾರಿಗಳು ದಾಖಲಿಸಿದ್ದಾರೆ ಎಂದು ಮಾಹಿತಿ ಇದೆ.